ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಾದ್ಯಂತ ಭಾನುವಾರ 50,129 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 578 ಮಂದಿ ಮೃತಪಟ್ಟಿದ್ದಾರೆ ಮತ್ತು 62,077 ಜನರು ಗುಣಮುಖರಾಗಿದ್ದಾರೆ.
ಭಾನುವಾರ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಅಸ್ತ್ರಜೆಂಕಾ ಲಸಿಕೆಯ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆ ಈ ವಾರದಲ್ಲಿ ಆರಂಭವಾಗಲಿದೆ ಎಂದು ಲಸಿಕೆ ತಯಾರಿಕ ಕಂಪನಿ ತಿಳಿಸಿದೆ. ಈಗಾಗಲೇ ಮೊದಲ ಮತ್ತು ಎರಡನೇ ಹಂತದ ಪರೀಕ್ಷೆ ಯಶಸ್ವಿಯಾಗಿದೆ.
ಕರ್ನಾಟಕದಲ್ಲಿ ಇಂದು 4 ಸಾವಿರ ಹೊಸ ಪ್ರಕರಣಗಳು ವರದಿಯಾಗಿವೆ. 32 ಜನರು ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 78,64,811 ಮಂದಿಗೆ ಸೋಂಕು ತಗುಲಿದ್ದು, 1,18,534 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 70,78,123 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,68,154 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 16,38,961 ಜನರಿಗೆ, ಎರಡನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶದಲ್ಲಿ 8,04,026 ಜನರಿಗೆ ಹಾಗೂ ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಒಟ್ಟಾರೆ 7,98,378 ಜನರಿಗೆ ಸೋಂಕು ತಗುಲಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳಲ್ಲೂ ಇಳಿಕೆಯಾಗುತ್ತಿದ್ದು ಸದ್ಯ 6 ಲಕ್ಷ ಸಕ್ರಿಯ ಪ್ರಕರಣಗಳಿವೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ಪ್ರಮಾಣ ಇತ್ತು ಎಂದು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ತಿಳಿಸಿವೆ.