ಮುಂಬೈ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ–ಮುಂಬೈ ನಡುವಿನ ರೈಲು ಮತ್ತು ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ತಿಳಿಸಿದ್ದಾರೆ.
‘ರೈಲು– ವಿಮಾನ ಸಂಚಾರ ಸ್ಥಗಿತಗೊಳಿಸುವ ಮೂಲಕ, ರಾಜ್ಯದಲ್ಲಿ ಕೊರೊನಾ ಸೊಂಕು ಹೆಚ್ಚಾಗದಂತೆ ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ‘ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಮಹಾರಾಷ್ಟ್ರದಲ್ಲಿ ಶುಕ್ರವಾರದ ವೇಳೆಗೆ 1,76,8695 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಂದು ದಿನದಲ್ಲಿ 5640 ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಪ್ರಮಾಣ 46511ಕ್ಕೆ ಏರಿದೆ.
ದೆಹಲಿಯಲ್ಲಿ ಶುಕ್ರವಾರ 6,608 ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸೋಂಕಿತರ ಸಂಖ್ಯೆ 5.17 ಲಕ್ಷದಷ್ಟಾಗಿದೆ. ಇದೇ ಅವಧಿಯಲ್ಲಿ 118 ಸಾವಿನ ಪ್ರಕರಣಗಳು ದಾಖಲಾಗಿವೆ. ಇಲ್ಲಿವರೆಗೆ ಒಟ್ಟು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8,159.