ಮುಂಬೈ, ಔರಂಗಾಬಾದ್: ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಮಹಾರಾಷ್ಟ್ರದಲ್ಲಿ ಸೋಮವಾರ 3,365 ಹಾಗೂ ಭಾನುವಾರ 4,092 ಪ್ರಕರಣಗಳು ದೃಢಪಟ್ಟಿವೆ. ಸೋಮವಾರ ಸೋಂಕಿನಿಂದ 23 ರೋಗಿಗಳು ಮೃತಪಟ್ಟರೆ 3,100 ಮಂದಿ ಗುಣಮುಖರಾಗಿದ್ದಾರೆ.
’ಕೆಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಆದರೂ, ಜನರು ಕೋವಿಡ್–19 ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ, ಕಠಿಣ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಅಜೀತ್ ಪವಾರ್ ತಿಳಿಸಿದ್ದಾರೆ.
ಪರಿಸ್ಥಿಯ ಪರಾಮರ್ಶೆ ನಡೆಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರುಮಂಗಳವಾರ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಸಭೆ ಕರೆದಿದ್ದಾರೆ.
ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಮರಾವತಿಯಲ್ಲಿ ಫೆಬ್ರುವರಿ ಆರಂಭದಿಂದಲೇ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ, ಹೊಸದಾಗಿ ಲಾಕ್ಡೌನ್ ಜಾರಿಗೊಳಿಸುವ ಉದ್ದೇಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.