ಮುಂಬೈ: ಮಹಾರಾಷ್ಟ್ರದಲ್ಲಿ ಸೋಮವಾರದಿಂದ ಜಾರಿಗೆ ಬರುವಂತೆ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾಕತಾಳೀಯ ಎಂಬಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಶನಿವಾರ ಈ ತೀರ್ಮಾನವನ್ನು ಪ್ರಕಟಿಸಿದರು.
ದೇಶದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯುವ ಕ್ರಮವಾಗಿ ಎಲ್ಲ ಧರ್ಮಗಳ ಪ್ರಾರ್ಥನಾ ಮತ್ತು ಪೂಜಾ ಸ್ಥಳಗಳನ್ನು ಅನಿರ್ದಿಷ್ಟ ಅವಧಿಗೆ ಮಾರ್ಚ್ ತಿಂಗಳಿನಿಂದ ಬಂದ್ ಮಾಡಲಾಗಿತ್ತು.
‘ದೇಗುಲಗಳನ್ನು ಸೋಮವಾರದಿಂದ ತೆರೆಯಲಾಗುವುದು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್–19 ಸಂಬಂಧಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುವುದು’ ಎಂದು ತಿಳಿಸಿದರು.
ಇತರೆ ರಾಜ್ಯಗಳಲ್ಲಿ ದೇವಸ್ಥಾನ, ಪ್ರಾರ್ಥನಾ ಸ್ಥಳಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದ್ದರೂ, ಮಹಾರಾಷ್ಟ್ರದಲ್ಲಿ ಈ ವಿಷಯ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ದೇಗುಲಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲು ಒತ್ತಾಯಿಸಿ ಶಿವಸೇನೆ ನೇತೃತ್ವದ ಸರ್ಕಾರದ ವಿರುದ್ಧಬಿಜೆಪಿ ಪ್ರತಿಭಟನೆಯನ್ನು ಕೈಗೊಂಡಿತ್ತು.
ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮತ್ತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರ ನಡುವೆಯೂ ಈ ವಿಷಯ ವಾಕ್ಸಮರಕ್ಕೆ ದಾರಿಮಾಡಿಕೊಟ್ಟಿತ್ತು.
ಮಹಾರಾಷ್ಟ್ರದಲ್ಲಿ ಭಾರತದ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿದೆ. ಇದೀಗ ಮಹಾರಾಷ್ಟ್ರದಲ್ಲಿ 85,045 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 45,809 ತಲುಪಿದೆ.
All religious places in the state to re-open for devotees from Monday, 16th November. Wearing the mask will be compulsory, all COVID norms will have to be followed: Government of Maharashtra pic.twitter.com/iT4IwDVz0C