ನವದೆಹಲಿ: ಕೋವಿಡ್–19 ಮೂರನೇ ಅಲೆ ಎದುರಿಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವಂತೆ ವಿರೋಧ ಪಕ್ಷಗಳಿಗೆ 185ಕ್ಕೂ ಹೆಚ್ಚು ಚಿಂತಕರು ಬಹಿರಂಗ ಪತ್ರ ಬರೆದಿದ್ದಾರೆ.
ಎರಡನೇ ಅಲೆ ಸಂದರ್ಭದಲ್ಲಿ ಬಹುತೇಕ ರಾಜಕೀಯ ಪಕ್ಷಗಳು ಜನರ ಹಿತಾಸಕ್ತಿಗಾಗಿ ಪಕ್ಷತೀತವಾಗಿ ಕಾರ್ಯನಿರ್ವಹಿಸುವ ಇಚ್ಛೆ ವ್ಯಕ್ತಪಡಿಸಿವೆ. ಆದರೆ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಯಾವುದೇ ಸಲಹೆಗಳನ್ನು ಸ್ವೀಕರಿಸಲಿಲ್ಲ. ಎಲ್ಲ ರಾಷ್ಟ್ರೀಯ ಪಕ್ಷಗಳನ್ನು ಒಳಗೊಂಡ ರಾಷ್ಟ್ರೀಯ ಕಾರ್ಯ ಪಡೆಯನ್ನು ರಚಿಸಲಿಲ್ಲ ಎಂದು ಟೀಕಿಸಿದ್ದಾರೆ.
ಹೀಗಾಗಿ, ಮೂರನೇ ಅಲೆಯನ್ನು ಎದುರಿಸಲು ರಾಜಕೀಯ ಪಕ್ಷಗಳು ಈಗಿನಿಂದಲೇ ಯೋಜನೆಗಳನ್ನು ರೂಪಿಸಬೇಕು. ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಆದ್ದರಿಂದ, ಸರ್ವ ರೀತಿಯಲ್ಲೂ ಸಿದ್ಧತೆಗಳನ್ನು ಕೈಗೊಳ್ಳುವುದು ಅಗತ್ಯವಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಆರ್ಥಿಕ ತಜ್ಞ ಕೌಶಿಕ್ ಬಸು, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಬೇಜವಾಡ ವಿಲ್ಸನ್, ಅಮ್ನೆಸ್ಟಿ ಇಂಟರ್ನ್ಯಾಷನಲ್ ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಲ್ ಶೆಟ್ಟಿ ಸೇರಿದಂತೆ ಹಲವು ಶಿಕ್ಷಣ ತಜ್ಞರು, ಚಿಂತಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.