ತಿರುವನಂತಪುರ: ಕೋವಿಡ್–19ನಿಂದ ಬಳಲುತ್ತಿದ್ದ 19 ವರ್ಷದ ಯುವತಿಯನ್ನು ಆರೈಕೆ ಕೇಂದ್ರಕ್ಕೆ ಕರೆದೊಯ್ಯುವಾಗ ಆಕೆಗೆ ಆಂಬುಲೆನ್ಸ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಪಟ್ಟನಂತಿಟ್ಟ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಚಾಲಕನನ್ನು ಅಲಪ್ಪುಳ ಜಿಲ್ಲೆಯ ಕಯಂಕುಳಂ ಮೂಲದ ನೌಫಾಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ಸೈಮನ್ ತಿಳಿಸಿದ್ದಾರೆ.
ಕೊಲೆ ಯತ್ನ ಹಾಗೂ ಇತರ ಆರೋಪಗಳಡಿ ಆರೋಪಿ ವಿರುದ್ಧ ಈಗಾಗಲೇ ಪ್ರಕರಣಗಳು ದಾಖಲಾಗಿವೆ. ಕೇರಳ ಮಹಿಳಾ ಆಯೋಗವೂ ಚಾಲಕನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಆಡೂರ್ ಎಂಬ ಊರಿನಿಂದ ಪಂಡಾಲಮ್ ಎಂಬಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಯುವತಿಯನ್ನು ಕರೆದೊಯ್ಯಲಾಗುತ್ತಿತ್ತು. ಆಂಬುಲೆನ್ಸ್ನಲ್ಲಿ ಮತ್ತೊಬ್ಬ ಮಹಿಳೆಯೂ ಇದ್ದರು. ಮಾರ್ಗ ಮಧ್ಯೆ ಆ ಮಹಿಳೆಯನ್ನು ಇಳಿಸಿದ ಚಾಲಕ, ಆಂಬುಲೆನ್ಸ್ಅನ್ನು ಆರಾಮುಳ ಎಂಬ ಪ್ರದೇಶಕ್ಕೆ ಒಯ್ದು, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ, ಚಾಲಕ ಯುವತಿ ಬಳಿ ಕ್ಷಮೆ ಕೋರಿದ್ದಾನೆ. ಕ್ಷಮೆ ಕೋರುತ್ತಿರುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದ ಯುವತಿ, ನಂತರ ಅಧಿಕಾರಿಗಳಿಗೆ ಆ ವಿಡಿಯೊ ತುಣುಕುಗಳನ್ನು ನೀಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಘಟನೆಯನ್ನು ಖಂಡಿಸಿರುವ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಆಂಬುಲೆನ್ಸ್ ಚಾಲಕನನ್ನಾಗಿ ನೇಮಿಸಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿರುವ ವಿರೋಧ ಪಕ್ಷಗಳು, ಯುವತಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿವೆ.
ಆಂಬುಲೆನ್ಸ್ ಸೇವೆ ಒದಗಿಸುವ ಖಾಸಗಿ ಸಂಸ್ಥೆ ಚಾಲಕನನ್ನು ನೇಮಕ ಮಾಡಿಕೊಂಡಿದೆ. ಆತನನ್ನು ಕೂಡಲೇ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.