ತಿರುವನಂತಪುರ: ಕೇರಳದಲ್ಲಿ ಕೋವಿಡ್ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದರೂ, ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ರಾಜ್ಯದಲ್ಲಿ ಕೋವಿಡ್ ಪಿಡುಗಿನ ತೀವ್ರತೆ ಕಡಿಮೆಯಾಗುತ್ತಿದೆ ಎಂದು ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯಬೇಕಾದವರ ಮತ್ತು ಐಸಿಯುನಲ್ಲಿ ದಾಖಲಾಗಬೇಕಾದವರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಸಂಪೂರ್ಣವಾಗಿ ಲಸಿಕೆ ಪಡೆದವರಿಗೆ ಸೋಂಕು ಬರುತ್ತಿದೆಯೇ ಅಥವಾ ಒಮ್ಮೆ ಸೋಂಕಿತರಾಗಿದ್ದವರಲ್ಲಿ ಮರು ಸೋಂಕು ಕಾಣಿಸಿಕೊಳ್ಳುತ್ತಿದೆಯೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ. ಸಮೀಕ್ಷೆಯ ಪ್ರಕಾರ ಮರು ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದರ ಜತೆಗೆ ರಾಜ್ಯದಲ್ಲಿ ಲಸಿಕೆ ನೀಡುವಿಕೆ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ಕೇರಳದಲ್ಲಿ ಮಂಗಳವಾರ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 148 ಜನರು ಮೃತಪಟ್ಟಿದ್ದಾರೆ.