ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
‘ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಈ ಸ್ಥಿತಿಯಲ್ಲಿ ಸಿಬಿಎಸ್ಇ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ಯುವಕರ ಭವಿಷ್ಯದ ಜತೆ ಕೇಂದ್ರ ಸರ್ಕಾರವು ಎಷ್ಟರಮಟ್ಟಿಗೆ ಚೆಲ್ಲಾಟವಾಡಲು ಹೊರಟಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ.
ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿರುವುದನ್ನು ಪರಿಶೀಲಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಿಬಿಎಸ್ಇಗೆ ಪತ್ರ ಬರೆದಿದ್ದಾರೆ.
ಒಂದೋ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಇಲ್ಲವಾದಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕು ಅಥವಾ ಆನ್ಲೈನ್ ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು ಎಂದು ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ಆಗ್ರಹಿಸಿದ್ದರು.
ಈಗಾಗಲೇ ನಿಗದಿಯಾಗಿರುವ ಪ್ರಕಾರ, ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 4ರಿಂದ ಜೂನ್ 7ರವರೆಗೆ ಪರೀಕ್ಷೆ ನಿಗದಿಯಾಗಿದೆ. 12ನೇ ತರಗತಿಯ ವಿದ್ಯಾರ್ಥಿಗಳಿಗೆ ಮೇ 4ರಿಂದ ಜೂನ್ 15ರ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.