ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಿರುವುದರ ಕುರಿತು ಅಸಮಾಧಾನ ಹೊರಹಾಕಿರುವ ದೆಹಲಿ ಹೈಕೋರ್ಟ್, ‘ನಗರವು ಶೀಘ್ರದಲ್ಲೇ ರಾಷ್ಟ್ರದ ಕೊರೊನಾ ರಾಜಧಾನಿ ಆಗುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದೆ.
‘ದೆಹಲಿ ಸರ್ಕಾರವು ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಪಿಡುಗು ನಿಯಂತ್ರಣ ತಪ್ಪಿದೆ’ ಎಂದು ನ್ಯಾಯಮೂರ್ತಿ ಹಿಮಾ ಕೋಹ್ಲಿ ಮತ್ತು ಸುಬ್ರಹ್ಮಣಿಯಂ ಪ್ರಸಾದ್ ಅವರಿದ್ದ ಪೀಠವು ಹೇಳಿತು. ‘ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ ಎಂದು ದೆಹಲಿ ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ ಕೋವಿಡ್ ಪ್ರಕರಣಗಳು ನಿಯಂತ್ರಣ ಮೀರಿವೆ’ ಎಂದು ಪೀಠವು ಹೇಳಿತು.
ಉತ್ತರ ದೆಹಲಿ ಮಹಾನಗರ ಪಾಲಿಕೆಯಡಿ ಕಾರ್ಯನಿರ್ವಹಿಸುವ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಶಿಕ್ಷಕರು ಸೇರಿದಂತೆ ಹಲವರಿಗೆ ವೇತನ ಬಾಕಿ ಉಳಿಸಿಕೊಂಡಿರುವುದರ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.