ನವದೆಹಲಿ: ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಬಗೆಗಿನ ನಿರ್ಣಯವನ್ನು ದೆಹಲಿ ಕಾಂಗ್ರೆಸ್ ಘಟಕವು ಭಾನುವಾರ ಅಂಗೀಕರಿಸಿದೆ.
'ದೇಶದಲ್ಲಿನ ಅಪಾಯಕಾರಿ ರಾಜಕೀಯ ಪರಿಸ್ಥಿತಿಯ ಬಗ್ಗೆ ಅವಲೋಕಿಸಲಾಗಿದೆ. ಆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯಂತಹ ಕ್ರಿಯಾಶೀಲ ಮತ್ತು ಪ್ರಬಲ ನಾಯಕ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿಯಬೇಕು' ಎಂದು ದೆಹಲಿ ಘಟಕದ ಮುಖ್ಯಸ್ಥ ಅನಿಲ್ ಕುಮಾರ್ ನಿರ್ಣಯದಲ್ಲಿ ತಿಳಿಸಿದ್ದಾರೆ.
ದೇಶವನ್ನು ವಿನಾಶದ ಹಾದಿಗೆ ಕೊಂಡೊಯ್ಯುತ್ತಿರುವ ಕೋಮುವಾದಿ, ಸರ್ವಾಧಿಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಎದುರಿಬೇಕಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಲು ರಾಹುಲ್ ಗಾಂಧಿಯಂತಹ ನಾಯಕರ ಅವಶ್ಯಕತೆ ಇದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.
2021ರ ಜೂನ್ನಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಚುನಾಯಿತ ಅಧ್ಯಕ್ಷರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕಳೆದ ವಾರ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ್ದ ಅವರು, 'ಪೂರ್ಣಾವಧಿ ಅಧ್ಯಕ್ಷರ ಸ್ಥಾನಕ್ಕಾಗಿ ನಡೆಯುವ ಚುನಾವಣೆಯ ವೇಳಾಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು' ಎಂದು ತಿಳಿಸಿದ್ದಾರೆ.