ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಜೈನ್ ಜೂನ್ 9ರವರೆಗೆ ಇ.ಡಿ. ವಶಕ್ಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಮಂಗಳವಾರ ಇಲ್ಲಿನ ನ್ಯಾಯಾಲಯವು ಜೂನ್ 9ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ.) ವಶಕ್ಕೆ ಒಪ್ಪಿಸಿದೆ.
ದೊಡ್ಡ ಸಂಚಿನ ಹಿಂದಿರುವ ಸತ್ಯವನ್ನು ಹೊರಗೆಳೆಯಲು ಜೈನ್ ಅವರನ್ನು ಮುಂದಿನ ವಿಚಾರಣೆಯ (ಜೂನ್ 9) ತನಕ ಇ.ಡಿ ವಶಕ್ಕೆ ಒಪ್ಪಿಸುವ ಅಗತ್ಯವನ್ನು ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯಲ್ ಅವರು ಪರಿಗಣಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಬಂಧಿಸಿದ್ದರು.
ದೆಹಲಿಯ ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ ಮತ್ತು ಜಲಸಂಪನ್ಮೂಲ ಸಚಿವರಾಗಿರುವ ಜೈನ್ ಬಂಧನವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಬಂಧನ
‘ಎಂಟು ವರ್ಷ ಹಳೆಯ ‘ಹುಸಿ’ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಸತ್ಯೇಂದ್ರ ಅವರು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದಾರೆ. ಅಲ್ಲಿ ಚುನಾವಣೆ ಸೋಲುವ ಭೀತಿಯಲ್ಲಿರುವ ಬಿಜೆಪಿ, ಹೀಗೆ ಮಾಡಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.
ಜೈನ್ ಮತ್ತು ಅವರ ಕುಟುಂಬದ ಒಡೆತನದ ಕಂಪನಿಗಳಿಗೆ ಸೇರಿದ ₹4.81 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ. ಇತ್ತೀಚೆಗೆ ಹೇಳಿತ್ತು.
ಹಿಮಾಚಲ ಪ್ರದೇಶ ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿದೆ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಪಡೆದಿರುವ ಎಎಪಿ, ಹಿಮಾಚಲದಲ್ಲಿಯೂ ಛಾಪು ಮೂಡಿಸುವ ನಿರೀಕ್ಷೆಯಲ್ಲಿದೆ. ಪಂಜಾಬ್ ಚುನಾವಣೆಗೆ ಮೊದಲೇ ಜೈನ್ ಅವರನ್ನು ಇ.ಡಿ. ಬಂಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜನವರಿಯಲ್ಲಿಯೇ ಹೇಳಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.