ನವದೆಹಲಿ (ಪಿಟಿಐ): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕುರಿತ ಮಾಹಿತಿ ಒದಗಿಸುವಂತೆ ಸೂಚಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಮುಂದಿನ ವಿಚಾರಣೆಯವರೆಗೆ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಮತ್ತು ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಸೂಚಿಸಿದರು.
ಬಳಿಕ ಪ್ರಕರಣದ ವಿಚಾರಣೆಯನ್ನು ಮೇ 23ಕ್ಕೆ ಮುಂದೂಡಿದರು.
ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಿಕೆಯಾದ ದೇಣಿಗೆಗೆ ತೆರಿಗೆ ವಿನಾಯಿತಿ ಕೋರಿ ಟ್ರಸ್ಟ್ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು 15 ದಿನಗಳ ಒಳಗಾಗಿ ಮಾಹಿತಿ ಒದಗಿಸುವಂತೆ 2022 ನವೆಂಬರ್ 30ರಂದು ಸಿಐಸಿ ಸೂಚಿಸಿತ್ತು.