ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ಗೆ ದೆಹಲಿ ಹೈಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಮೆಹಬೂಬಾ ಅವರ ಪುತ್ರಿ ಇಲ್ತಿಜಾ ಮುಫ್ತಿ ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಸಿದ್ದಾರ್ಥ್ ಮೃದುಲ್ ಮತ್ತು ಹೈರಾಮ್ ಭಂಭಾನಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎದುರು ಈ ವಿಷಯ ವಿಚಾರಣೆಗೆ ಬಂದಿತು. ಮಾರ್ಚ್ 15ರೊಳಗೆ ಭೌತಿಕವಾಗಿ ವಿಚಾರಣೆಗೆ ಹಾರಾಗುವ ನೋಟಿಸ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದೆ.
ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಮೆಹಬೂಬಾ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಆದರೆ ಆ ಸಮನ್ಸ್ನಲ್ಲಿ ಈ ಕಾಯ್ದೆಯ ವಿಷಯವೇ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಮನ್ಸ್ ಅನ್ನು ತೆಗೆದು ಹಾಕುವಂತೆ ನ್ಯಾಯಾಲಯಕ್ಕೆ ಕೋರಿದ್ದರು ಎಂದು ಇಲ್ತಿಜಾ ತಿಳಿಸಿದ್ದಾರೆ.