ದೆಹಲಿ ಮಾಲಿನ್ಯ: 1 ವಾರ ಶಾಲೆಗಳಿಗೆ ರಜೆ, ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಪಾಯಕಾರಿ ಮಟ್ಟಕ್ಕೆ ತಲುಪಿರುವ ವಾಯುಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ತುರ್ತು ಕ್ರಮಗಳನ್ನು ಘೋಷಿಸಿದ್ದಾರೆ. ಶಾಲೆಗಳಿಗೆ ಒಂದು ವಾರ ರಜೆ, ಕಟ್ಟಡ ಕಾಮಗಾರಿಗಳಿಗೆ ನಿಷೇಧ ಮತ್ತು ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಆದೇಶ ಮಾಡಿದ್ದಾರೆ.
ಮಾಲಿನ್ಯದ ಪರಿಸ್ಥಿತಿ ಸುಧಾರಣೆಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಕ್ರಮಗ:ಳನ್ನು ಘೋಷಿಸಿದ್ದಾರೆ. ಲಾಕ್ಡೌನ್ ಬಗ್ಗೆಯೂ ಸುಪ್ರೀಂ ಕೋರ್ಟ್ ಮುಂದೆ ಪ್ರಸ್ತಾಪ ಇಡುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ಧಾರೆ.
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಳವನ್ನು ತುರ್ತು ಪರಿಸ್ಥಿತಿ ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ಪರಿಸ್ಥಿತಿ ನಿಯಂತ್ರಣಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ದೆಹಲಿ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚಿಸಿತ್ತು.
ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಸೋಮವಾರದಿಂದ ಒಂದು ವಾರ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಕಟ್ಟಡ ಕಾಮಗಾರಿಗಳಿಗೆ ನಿಷೇಧ ವಿಧಿಸಲಾಗಿದೆ. ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗುವುದು ಮತ್ತು ಖಾಸಗಿ ಕಂಪನಿಗಳಿಗೆ ಪ್ರತ್ಯೇಕ ಸೂಚನೆಗಳನ್ನು ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.
ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಮಾಲಿನ್ಯ ಹೆಚ್ಚಳವಾಗಿದೆ. ಪರಿಸ್ಥಿತಿ ಸುಧಾರಣೆಗೆ ಸಂಬಂಧಪಟ್ಟ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ.. ‘ದೆಹಲಿಯಲ್ಲಿ ಮಾಲಿನ್ಯ ತುರ್ತು ಪರಿಸ್ಥಿತಿ’: ಶೀಘ್ರ ಕ್ರಮಕ್ಕೆ ಸುಪ್ರೀಂ ತಾಕೀತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.