ನವದೆಹಲಿ: ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯು ಜಾರಿಗೊಳಿಸಿದ್ದ ಸಮನ್ಸ್ ಅನ್ನು ಪ್ರಶ್ನಿಸಿ, ಫೇಸ್ಬುಕ್ ಇಂಡಿಯಾದ ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿತು.
ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ದೊಂಬಿಗೆ ಸಂಬಂಧಿಸಿದಂತೆ ಸಾಕ್ಷ್ಯ ನೀಡಲು ಸೂಚಿಸಿ ಸಮಿತಿಯು ಸಮನ್ಸ್ ಜಾರಿಮಾಡಿತ್ತು. ಸಮನ್ಸ್ ಜಾರಿ ಮಾಡುವ ಅಧಿಕಾರ ಸಮಿತಿಗಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.
‘ಅವಧಿಪೂರ್ವದಲ್ಲಿಯೇ ಈ ಅರ್ಜಿ ಸಲ್ಲಿಸಲಾಗಿದೆ. ಸಮಿತಿಯ ಎದುರು ಹಾಜರಾಗುವುದರಿಂದ ಅವರಿಗೆ ಏನು ಆಗದು’ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ದಿನೇಶ್ ಮಹೇಶ್ವರಿ ಮತ್ತು ಹೃಷಿಕೇಷ್ ರಾಯ್ ಅವರಿದ್ದ ತ್ರಿಸದಸ್ಯ ಪೀಠವು ಅಭಿಪ್ರಾಯಪಟ್ಟಿತು.