ಪಣಜಿ: ಕಾಂಗ್ರೆಸ್ ಅರೆಕಾಲಿಕ ಪಕ್ಷವಾಗಿದ್ದು, ದೇಶದಿಂದ ನಿಧಾನವಾಗಿ ಮರೆಯಾಗುತ್ತಿದೆ ಎಂದು ಬಿಜೆಪಿ ನಾಯಕ, ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ಚುನಾವಣೆಗೂ ಮುನ್ನವೇ ದೆಹಲಿ ಮತ್ತು ಪಶ್ಚಿಮ ಬಂಗಾಳದ ರಾಜಕೀಯ ಪಕ್ಷಗಳು ಪ್ರಯೋಗಗಳನ್ನು ಮಾಡಲು ಗೋವಾಕ್ಕೆ ಬಂದಿವೆ ಎಂದು ಅವರು ಹೇಳಿದ್ದಾರೆ. ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
‘ಅವರೆಲ್ಲ ತಮ್ಮ ರಾಜಕೀಯ ಪಕ್ಷಗಳನ್ನು ಪ್ರಯೋಗಕ್ಕೆ ಒಡ್ಡುವುದಕ್ಕಾಗಿ ಇಲ್ಲಿಗೆ ಬಂದಿದ್ದಾರೆ. ಆದರೆ, ತಮ್ಮ ಜತೆ ಯಾರು ಇರಬೇಕೆಂಬುದು ಗೋವಾ ಜನರಿಗೆ ತಿಳಿದಿದೆ. ಚುನಾವಣೆ ಮುಗಿದ ಬಳಿಕ ಆ ಪಕ್ಷಗಳೆಲ್ಲ ಇಲ್ಲಿಂದ ತೆರಳಲಿವೆ’ ಎಂದು ಫಡಣವೀಸ್ ಹೇಳಿದ್ದಾರೆ.
ಟಿಎಂಸಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧವೂ ಫಡಣವೀಸ್ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗ ಮತ್ತು ಅಪರಾಧ ಪ್ರಕರಣಗಳಲ್ಲಿ ಪಶ್ಚಿಮ ಬಂಗಾಳ ಅಗ್ರ ಸ್ಥಾನದಲ್ಲಿದೆ ಎಂದು ಅವರು ಟೀಕಿಸಿದ್ದಾರೆ.
ಫಡಣವೀಸ್ ಅವರು ಗೋವಾದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಯಾಗಿದ್ದಾರೆ.