ನವದೆಹಲಿ: ಆರು ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಗೆ ಬಳಸಲಾದ ಇವಿಎಂ ಹಾಗೂ ವಿವಿಪ್ಯಾಟ್ಗಳನ್ನು ತಕರಾರು ಅರ್ಜಿಗಳ ಕಾರಣಗಳಿಂದಾಗಿ ಪುನಃ ಬಳಕೆ ಮಾಡಲು ಆಗುತ್ತಿಲ್ಲ. ಇವುಗಳ ಬಳಕೆಗೆ ಅನುಕೂಲವಾಗುವ ಸಂಬಂಧ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಸುಪ್ರೀಂಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದೆ.
ಚುನಾವಣಾ ಆಯೋಗದ ಅರ್ಜಿಯನ್ನು ಪುರಸ್ಕರಿಸಿರುವ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್.ಬೋಪಣ್ಣ ಅವರಿರುವ ನ್ಯಾಯಪೀಠ, ಮುಂದಿನ ವಾರ ವಿಚಾರಣೆ ನಡೆಸುವುದಾಗಿ ಹೇಳಿತು.
‘ಚುನಾವಣಾ ತಕರಾರು ಅರ್ಜಿಗಳ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಇವಿಎಂಗಳು ಹಾಗು ವಿವಿಪ್ಯಾಟ್ಗಳನ್ನು ಸಂರಕ್ಷಿಸಿ ಇಡಲಾಗಿದೆ. ತಕರಾರು ಅರ್ಜಿಗಳ ವಿಲೇವಾರಿಯಾಗದೇ ಇವುಗಳನ್ನು ಬಳಕೆ ಮಾಡುವಂತಿಲ್ಲ. ಹೀಗಾಗಿ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಆಯೋಗದ ಪರ ಹಿರಿಯ ವಕೀಲ ವಿಕಾಸ್ ಸಿಂಗ್ ನ್ಯಾಯಾಲಯ ಮನವಿ ಮಾಡಿದರು.
‘ಅಸ್ಸಾಂ, ಕೇರಳ, ದೆಹಲಿ, ಪುದುಚೇರಿ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಗೆ ಸಂಬಂಧಿಸಿ ತಕರಾರು ಅರ್ಜಿಗಳನ್ನು ಸಲ್ಲಿಸಲು ಕಾಲಮಿತಿ ನಿಗದಿ ಮಾಡಬೇಕು ಎಂದೂ ಅವರು ಮನವಿ ಮಾಡಿದರು.
‘ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಪಂಜಾಬ್ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದ್ದು, ಈ ಇವಿಎಂಗಳು, ವಿವಿಪ್ಯಾಟ್ಗಳ ಅಗತ್ಯವಿದೆ’ ಎಂದು ಅವರು ಕೋರ್ಟ್ ಗಮನಕ್ಕೆ ತಂದರು.