ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಆಪ್ತರಿಬ್ಬರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂದೆ ಅವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರನ್ನು ಶುಕ್ರವಾರ 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.
ಮುಂಬೈನ ಬಲ್ಲಾರ್ಡ್ ಎಸ್ಟೇಟ್ನಲ್ಲಿರುವ ಕಚೇರಿಯಲ್ಲಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಇಬ್ಬರೂ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಅಕ್ರಮ ಹಣ ವರ್ಗಾವಣೆ ನಿಯಂತ್ರ ಕಾಯ್ದೆ (ಪಿಎಂಎಲ್ಎ)’ ಅಡಿ ಅನಿಲ್ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಶೋಧ ನಡೆಸಿದ್ದರು. ಬಳಿಕ ಇವರಿಬ್ಬರನ್ನು ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಕರೆತರಲಾಗಿತ್ತು.
ಬಂಧಿತರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಅಧಿಕಾರಿಗಳು ಕಳೆದ ತಿಂಗಳು ಅನಿಲ್ ದೇಶಮುಖ್ ಸೇರಿದಂತೆ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಸೂಚಿಸಿರುವ ಬಾಂಬೆ ಹೈಕೋರ್ಟ್ನ ಆದೇಶದ ಮೇರೆಗೆ ಸಿಬಿಐ ಮೊದಲ ಬಾರಿಗೆ ಅನಿಲ್ ದೇಶಮುಖ್ ಅವರನ್ನು ಪ್ರಾಥಮಿಕ ವಿಚಾರಣೆ ನಡೆಸಿತ್ತು. ನಂತರ ಇ.ಡಿ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು.