ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆಬುಧವಾರ ವಿಚಾರಣೆಗೆ ಹಾಜರಾಗಲು ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.
ಈ ಪ್ರಕರಣದಲ್ಲಿ, ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರನ್ನು ತನಿಖಾ ಸಂಸ್ಥೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ, ಈ ಬೆಳವಣಿಗೆ ನಡೆದಿದೆ.
ಮೂಲಗಳ ಪ್ರಕಾರ, ದೇಶ್ಮುಖ್ ಅವರು ಆಗಸ್ಟ್ 18 ರಂದು ದಕ್ಷಿಣ ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶ್ಮುಖ್ ಅವರಿಗೆ ನೀಡುತ್ತಿರುವ ಐದನೇ ಸಮನ್ಸ್ ಆಗಿದೆ.
ಈ ಪ್ರಕರಣದಲ್ಲಿ, ಮಾಜಿ ಸಚಿವರಿಂದ ಹೆಚ್ಚಿನ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ಅವರಿಗೆ ಹೊಸದಾಗಿ ಸಮನ್ಸ್ ನೀಡಲಾಗಿದೆ.