ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಕೇರಳದ ಪಿಎಫ್ಐ ಅಧ್ಯಕ್ಷ ಒ.ಎಂ ಅಬ್ದುಲ್ ಸಲಾಂ ಮತ್ತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಎಲಾರಾಮ್ ಅವರ ಮನೆಯ ಮೇಲೆಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೇರಳದ ಮಲಪ್ಪುರಂ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಇಡಿಯು ಶೋಧ ಕಾರ್ಯಾಚರಣೆಗಳನ್ನು ನಡೆಸಿವೆ ಎಂದು ಮೂಲಗಳು ಹೇಳಿವೆ.
ಕೇರಳ ಮೂಲದ ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ)ಇತರ ನಾಯಕರ ಮನೆ ಮೇಲೆಯೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆಗಳಿಗೆ ಪಿಎಫ್ಐ ಉತ್ತೇಜನ ನೀಡಿದೆ ಎಂಬ ಆರೋಪದಡಿ ಇಡಿ ತನಿಖೆ ನಡೆಸುತ್ತಿದೆ. ಈ ಹಿಂದೆ ಇಡಿಯು ಸಲಾಂ ಅವರ ಹೇಳಿಕೆಯನ್ನು ದಾಖಲಿಸಿತ್ತು.