ನವದೆಹಲಿ: ಸರ್ಕಾರಿ ನೌಕರರಿಗೆ ನೀಡುವ ಸೇವಾ ಸೌಲಭ್ಯವನ್ನು ತಮಗೂ ನೀಡುವಂತೆಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿ ಒತ್ತಾಯಿಸಲಾಗದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠವು, ಕೆಲವೊಂದು ಅನುಕೂಲತೆ ನೀಡಬೇಕೋ ಬೇಡವೋ ಎಂಬುದನ್ನು ಪರಿಣತರ ತಂಡಕ್ಕೆ ಬಿಡಬೇಕು. ಈ ವಿಷಯದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲಾಗದು. ಏಕೆಂದರೆ, ಇದು ಆರ್ಥಿಕ ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಎಂದು ಹೇಳಿತು.
ಮಹಾರಾಷ್ಟ್ರದ ಜಲ ಮತ್ತು ಭೂಮಿ ಮೇಲ್ವಿಚಾರಣೆ ಸಂಸ್ಥೆ (ವಾಲ್ಮಿ) ಸಿಬ್ಬಂದಿಯ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು.