ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
₹100 ಕೋಟಿ ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಸಂಬಂಧ ಇಡಿ ಹಲವು ಬಾರಿ ಸಮನ್ಸ್ ನೀಡಿದ್ದು, ಅನಿಲ್ ದೇಶ್ಮುಖ್ ವಿಚಾರಣೆಗೆ ಹಾಜರಾಗುವುದರಿಂದ ತಪ್ಪಿಸಿಕೊಂಡಿದ್ದಾರೆ. ದೇಶದಿಂದ ದೇಶ್ಮುಖ್ ಪಲಾಯನ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ಔಟ್ ನೋಟಿಸ್ ಜಾರಿಯಾಗಿರುವುದಾಗಿ ವರದಿಯಾಗಿದೆ.
ಈ ಪ್ರಕರಣದಲ್ಲಿ ದೇಶ್ಮುಖ್ ಅವರನ್ನು ತನಿಖಾ ಸಂಸ್ಥೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ನಿರಾಕರಿಸಿದೆ.
ಸೆಪ್ಟೆಂಬರ್ 3ರಂದು ದೇಶ್ಮುಖ್ ಅವರ ಕಾನೂನು ಸಲಹಾ ತಂಡದ ಆನಂದ್ ದಾಗಾ ಅವರನ್ನು ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಬಗ್ಗೆ ಸಿಬಿಐ ಇಡೀ ದಿನ ಪ್ರಶ್ನೆ ಮಾಡಿತ್ತು.
ಪ್ರತಿ ತಿಂಗಳು ₹100 ಕೋಟಿ ವಸೂಲಿ ಮಾಡಿಕೊಡುವ ಗುರಿಯನ್ನು ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಚಿನ್ ವಾಜೆ ಅವರಿಗೆ ಅನಿಲ್ ದೇಶಮುಖ್ ನೀಡಿದ್ದರು ಎಂದು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಮತ್ತು ಹಾಲಿ ಗೃಹ ರಕ್ಷಕ ದಳದ ಕಮಾಂಡಂಟ್ ಜನರಲ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.