ನವದೆಹಲಿ: ‘ಕೃಷಿ ಕ್ಷೇತ್ರದ ಸುಧಾರಣೆಯ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ಮಸೂದೆಗಳು ಆಹಾರ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸಲಿವೆ. ವಿರೋಧ ಪಕ್ಷಗಳೆಲ್ಲಾ ಒಗ್ಗೂಡಿ ಈ ಮಸೂದೆಗಳನ್ನು ವಿರೋಧಿಸಬೇಕು’ ಎಂದು ಕಾಂಗ್ರೆಸ್ ಪಕ್ಷವು ಕರೆ ನೀಡಿದೆ.
‘ಆಹಾರ ಭದ್ರತೆಯನ್ನು ಉತ್ತೇಜಿಸಲು ಸಹಕಾರಿಯಾಗುವ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ), ಸಾರ್ವಜನಿಕ ಪಡಿತರ ವ್ಯವಸ್ಥೆಯಂತಹ (ಪಿಡಿಎಸ್) ಹಲವು ತತ್ವಗಳ ತಳಹದಿಯ ಮೇಲೆ ಕಾಂಗ್ರೆಸ್ ಪಕ್ಷದ 2019ರ ಚುನಾವಣಾ ಪ್ರಣಾಳಿಕೆಯು ರೂಪಿತವಾಗಿತ್ತು’ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ವಕ್ತಾರರು ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ’ ಎಂದೂ ಅವರು ದೂರಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು ಎಂದು ಬಿಜೆಪಿಶುಕ್ರವಾರ ಆರೋಪಿಸಿತ್ತು.
‘ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಮೋದಿ ಸರ್ಕಾರವು ಕಾರ್ಪೊರೇಟ್ ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ’ ಎಂದು ಅವರು ಕಿಡಿಕಾರಿದ್ದಾರೆ.