ನವದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲಿರುವ ರೈತ ಸಂಘಟನೆಗಳು, ಇಂದು (ಫೆಬ್ರುವರಿ 18) ಗುರುವಾರದಂದು ನಾಲ್ಕು ತಾಸಿನ ರಾಷ್ಟ್ರವ್ಯಾಪ್ತಿ ರೈಲ್ ರೋಕೋ (ರೈಲು ತಡೆ) ಚಳವಳಿಗೆ ಕರೆ ನೀಡಿದೆ.
ಇದೇ ಸಂದರ್ಭದಲ್ಲಿ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸುವಂತೆ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮನವಿ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಿಸಾನ್ ಆಂದೋಲನ ಸಮಿತಿಯ ವಕ್ತಾರ ಜಗ್ದಾರ್ ಸಿಂಗ್ ಬಜ್ವಾ, ಫೆ.18ರಂದು ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈತರು ಶಾಂತಿಯುತವಾಗಿ ರೈಲು ರೋಕೋ ಚಳವಳಿ ನಡೆಸಲಿದ್ದಾರೆ ಎಂದು ತಿಳಿಸಿದರು.
ಪ್ರಯಾಣಿಕರಿಗೆ ಅನಾನುಕೂಲತೆಯನ್ನು ತಪ್ಪಿಸಲು ಉಪಹಾರಗಳನ್ನು ನೀಡಲಾಗುವುದು ಎಂದವರು ತಿಳಿಸಿದರು.
ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು, ನವೆಂಬರ್ 26ರಿಂದಲೇ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆಸಿದರೂ ಬಿಕ್ಕಟ್ಟು ಇತ್ಯರ್ಥಗೊಂಡಿಲ್ಲ.
ಈ ನಡುವೆ ರೈತರ ಸಮಸ್ಯೆಗಳನ್ನು ಯಾವುದೇ ವಿಳಂಬ ಮಾಡದೇ ಸರ್ಕಾರ ತಕ್ಷಣ ಬಗೆಹರಿಸಬೇಕೆಂದು ಎಸ್ಕೆಎಂ ಒತ್ತಾಯಿಸಿದೆ. ರೈತರ ಹೋರಾಟದ ಬೇಡಿಕೆಗಳನ್ನು ಈಡೇರಿಸುವ ಬದಲು ಬಿಜೆಪಿ ಅದನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ. ಆಡಳಿತ ಪಕ್ಷದ ಈ ನೀತಿಯನ್ನು ಎಸ್ಕೆಎಂ ಖಂಡಿಸುತ್ತಿದ್ದು, ರೈತರ ಸಮಸ್ಯೆಗಳನ್ನು ಯಾವುದೇ ವಿಳಂಬ ಮಾಡದೇ ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿದೆ.
ಜನವರಿ 26 ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ ನಡೆದಿತ್ತು. ತದಾ ಬಳಿಕ ಫೆಬ್ರುವರಿ 6ರಂದು ರೈತ ಸಂಘಟನೆಗಳು ದೇಶವ್ಯಾಪಿಯಾಗಿ ಚಕ್ಕಾ ಜಾಮ್ (ರಸ್ತೆ ತಡೆ) ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ಏತನ್ಮಧ್ಯೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು ದೇಶವ್ಯಾಪಿಯಾಗಿ ಮಹಾ ಪಂಚಾಯಿತಿಗಳನ್ನು ಆಯೋಜಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ರೈತರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.