ರೈತರ ಜತೆ 6ನೇ ಸುತ್ತಿನ ಸಭೆ ರದ್ದುಪಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ರೈತ ಸಂಘಟನೆಗಳ ಜತೆ ಬುಧವಾರ ನಡೆಸಲು ಉದ್ದೇಶಿಸಲಾಗಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಮಾತುಕತೆ ನಡೆಸಲು ನಿರಾಕರಿಸಿದ್ದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
‘ರೈತ ಸಂಘಟನೆಗಳ ಮುಖಂಡರೊಂದಿಗೆ ಬುಧವಾರ ಆಯೋಜಿಸಲಾಗಿದ್ದ ಸಭೆಯನ್ನು ರದ್ದುಪಡಿಸಲಾಗಿದೆ’ ಎಂದು ಕೃಷಿ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ರೈತ ಸಂಘಟನೆಗಳ ಮುಖಂಡರ ಜತೆ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದರು. ಆದರೆ, ಯಾವುದೇ ಪರಿಹಾರ ಕಂಡುಕೊಳ್ಳುವಲ್ಲಿ ಸಭೆ ವಿಫಲವಾಗಿತ್ತು.
ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳಿಗೆ ಕೆಲವು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಲಿಖಿತ ಪ್ರಸ್ತಾವಗಳನ್ನು ಮಂಗಳವಾರದ ಸಭೆಯಲ್ಲಿ ಶಾ ಮುಂದಿಟ್ಟಿದ್ದರು. ಸರ್ಕಾರದ ಈ ಪ್ರಸ್ತಾವಗಳನ್ನು ಅಧ್ಯಯನ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಮತ್ತು ಬುಧವಾರದ ಸಭೆಗೆ ಹಾಜರಾಗುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.