ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಸೋಮವಾರ ಬೆಳಿಗ್ಗೆಯಿಂದ ರೈತರು ಸರದಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
ಮೊದಲ ಸರದಿಯಲ್ಲಿ 11 ಮಂದಿ ಧರಣಿ ಮಾಡಲಿದ್ದಾರೆ ಎಂದು ರೈತ ನಾಯಕರು ತಿಳಿಸಿದರು.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪಂಜಾಬ್, ಹರಿಯಾಣ ಸೇರಿದಂತೆ ದೇಶದ ಇತರೆ ರೈತರು ದೆಹಲಿಯ ವಿವಿಧ ಗಡಿಭಾಗಗಳಲ್ಲಿ ಕಳೆದ ನಾಲ್ಕು ವಾರಗಳಿಂದ ಪ್ರತಿಭಟಿಸುತ್ತಿದ್ದಾರೆ.
‘ರೈತರು ಸೋಮವಾರ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ. ಸಿಂಘು ಗಡಿಯಲ್ಲಿ 11 ಮಂದಿ ಮೊದಲ ಸರದಿಯಲ್ಲಿ ಧರಣಿಯನ್ನು ನಡೆಸಲಿದ್ದಾರೆ. ಹೀಗೆ ದಿನಪೂರ್ತಿ ಧರಣಿ ಮುಂದುವರಿಯಲಿದೆ’ ಎಂದು ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ತಿಳಿಸಿದರು.
ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ಈ ಧರಣಿಯಲ್ಲಿ ಭಾಗಿಯಾಗುವಂತೆ ಅವರು ಕೇಳಿಕೊಂಡಿದ್ದಾರೆ.
ರೈತರು ಪ್ರತಿಭನಟೆಯಿಂದಾಗಿ ದೆಹಲಿ ಹಲವು ಮಾರ್ಗಗಳು ಮುಚ್ಚಿವೆ. ಪೊಲೀಸರು ಈ ಬಗ್ಗೆ ಸತತವಾಗಿ ಮಾಹಿತಿಯನ್ನು ಪ್ರಕಟಿಸುತ್ತಿದ್ದಾರೆ.