ರಾಯಪುರ: ಕೋವಿಡ್–19 ಚಿಕಿತ್ಸೆಗೆ ಬಳಸುತ್ತಿರುವ ಔಷಧಿ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದ್ದಾರೆ ಎಂಬ ಆರೋಪದಡಿ ಯೋಗ ಗುರು ರಾಮ್ದೇವ್ ವಿರುದ್ಧ ಛತ್ತೀಸಗಢದ ರಾಯಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
‘ಭಾರತೀಯ ವೈದ್ಯಕೀಯ ಮಂಡಳಿಯ (ಐಎಂಎ)ಛತ್ತೀಸಗಡ ಶಾಖೆಯವರು ನೀಡಿದ ದೂರಿನ ಆಧಾರದ ಮೇರೆಗೆ ರಾಮ್ದೇವ್ ಅವರ ವಿರುದ್ಧ ಬುಧವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ತನಿಖೆ ಆರಂಭಿಸಲಾಗಿದೆ’ ಎಂದು ರಾಯಪುರದ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್ ಅವರು ತಿಳಿಸಿದ್ದಾರೆ.
‘ಭಾರತ ಸರ್ಕಾರ, ಐಸಿಎಂಆರ್ ಸೇರಿದಂತೆ ಇತರೆ ಸಂಸ್ಥೆಗಳು ಕೋವಿಡ್ ಚಿಕಿತ್ಸೆಗೆ ಬಳಸುತ್ತಿರುವ ಔಷಧಿ ಮತ್ತುಆಧುನಿಕ ವೈದ್ಯಕೀಯ ವಿಜ್ಞಾನದ ಬಗ್ಗೆ ಕಳೆದ ಒಂದು ವರ್ಷದಿಂದ ರಾಮ್ದೇವ್ ಅವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹರಡುತ್ತಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.
‘ಎಲ್ಲಾ ವೈದ್ಯಕೀಯ ಸಿಬ್ಬಂದಿ, ವೈದ್ಯರು ಕೋವಿಡ್ ವಿರುದ್ಧ ಹೋರಾಡುತ್ತಿದ್ದರೆ, ಯೋಗ ಗುರು ರಾಮ್ದೇವ್ ಅವರು ಅನುಮೋದಿತ ಚಿಕಿತ್ಸಾ ಪದ್ಧತಿಯ ಬಗ್ಗೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಲವು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.
‘ಆಧುನಿಕ ವೈದ್ಯಕೀಯ ಸೌಲಭ್ಯ ಮತ್ತು ಅಲೋಪಥಿ ಔಷಧಿಗಳಿಂದ ಜನರ ಜೀವಕ್ಕೆ ಅಪಾಯವಿದೆ ಎಂಬ ಹೇಳಿಕೆಯನ್ನು ರಾಮ್ದೇವ್ ಅವರು ನೀಡಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.