ನವದೆಹಲಿ: ಪಶ್ಚಿಮ ದೆಹಲಿಯ ಮಾಯಾಪುರಿ ಪ್ರದೇಶದಲ್ಲಿರುವ ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಜಾನೆ 3.50ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿದ್ದು, ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದರು.
ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾತನಾಡಿ, ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಖಾನೆಯ ಬಾಗಿಲು ಒಡೆದು ಒಳಗಿದ್ದ ಮೂವರನ್ನು ರಕ್ಷಿಸಿದ್ದಾರೆ, ಅವರಲ್ಲಿ ಒಬ್ಬರು ಪ್ರಜ್ಞಾಹೀನರಾಗಿದ್ದಾರೆ ಎಂದು ಹೇಳಿದ್ದಾರೆ.
ಕೂಡಲೇ ಆತನನ್ನು ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮೃತನನ್ನು ಜುಗಾಲ್ ಕಿಶೋರ್ ಎಂದು ಗುರುತಿಸಲಾಗಿದೆ. ಯಂತ್ರಗಳು ಮತ್ತು ಕಚ್ಚಾ ವಸ್ತುಗಳನ್ನು ಇಟ್ಟುಕೊಂಡಿದ್ದ ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅವಘಡದಿಂದ ರಕ್ಷಿಸಿದ ಇಬ್ಬರನ್ನು ಅಮನ್ ಅನ್ಸಾರಿ (18) ಮತ್ತು ಫಿರೋಜ್ ಅನ್ಸಾರಿ (24) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.