ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ ಅವರು ಇಂದು (ಶನಿವಾರ) ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ರೋಸಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
2009ರಲ್ಲಿ ಅಂದಿನ ಆಂಧ್ರಪ್ರದೇಶದ ಸಿಎಂ ವೈ.ಎಸ್.ರಾಜಶೇಖರ ರೆಡ್ಡಿ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದರು. ಆಗ ರೋಸಯ್ಯ ಅವರು 2009ರ ಸೆಪ್ಟೆಂಬರ್ 3ರಿಂದ 2010ರ ನವೆಂಬರ್ 24 ರವರೆಗೆ ಮುಖ್ಯಮಂತ್ರಿಯಾಗಿದ್ದರು.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ರೋಸಯ್ಯ, 2011 ರಿಂದ 2016 ರವರೆಗೆ ತಮಿಳುನಾಡು ರಾಜ್ಯಪಾಲರಾಗಿ ಸೇವೆ ಸಲ್ಲಿದ್ದರು. ಅವರು ಕರ್ನಾಟಕದ ರಾಜ್ಯಪಾಲರಾಗಿಯೂ ಎರಡು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಿದ್ದರು.
1933ರಲ್ಲಿ ಜನಿಸಿದ್ದ ರೋಸಯ್ಯ ಅವರು 1968ರಲ್ಲಿ ಆಂಧ್ರ ಪ್ರದೇಶದ ಚಿರಾಲ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ರೋಸಯ್ಯ ನಿಧನಕ್ಕೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
పెద్దలు రోశయ్య గారి మరణవార్త నన్నెంతగానో బాధించింది. ఆంధ్రప్రదేశ్ మాజీ ముఖ్యమంత్రిగా, ఆర్థిక మంత్రిగా, శాసనసభ్యుడిగా... సుదీర్ఘ రాజకీయ జీవితంలో పలు పదవులను అలంకరించిన రోశయ్య గారి మృతి రెండు తెలుగు రాష్ట్రాలకు తీరని లోటు. ఆయన కుటుంబానికి నా ప్రగాఢ సానుభూతిని తెలియజేస్తున్నాను.