ಸಾರ್ವಜನಿಕ ಲೂಟಿ ಮತ್ತು ಬೆಲೆ ಏರಿಕೆ ವಿರುದ್ಧ ತುರ್ತಾಗಿ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ರಾಜ್ಯ ಘಟಕಗಳಿಗೆ ಸೂಚಿಸಿದ್ದಾರೆ.
ಸಾಂಕ್ರಾಮಿಕ ರೋಗ, ಆರ್ಥಿಕ ಕುಸಿತ, ನಿರುದ್ಯೋಗ, ವೇತನ ಕಡಿತ, ಉದ್ಯೋಗ ಕಡಿತದಿಂದಾಗಿ ಸಂಕಷ್ಟದಲ್ಲಿರುವ ಜನರ ಮೇಲೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಅನಿಯಂತ್ರಿತ ಏರಿಕೆಯು ಬಲವಾದ ಹೊಡೆತ ನೀಡಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಅಭಿಯಾನ ನಡೆಸುವಂತೆಯೂ ಸೂಚಿಸಿದ್ದಾರೆ.
ಸಾಂಕೇತಿಕ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಪೆಟ್ರೋಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮ ಎಲ್ಲ ಗೃಹಪಯೋಗಿ ಹಾಗೂ ಅಗತ್ಯ ವಸ್ತುಗಳ ಮೇಲೆ ಬೀರಿದೆ. ಅನೇಕ ರಾಜ್ಯಗಳಲ್ಲಿ ಈಗಾಗಲೇ ಬೆಲೆ 100 ರೂ. ದಾಟಿದೆ.
ಕಳೆದ 13 ತಿಂಗಳಿನಿಂದಲೂ ಇಂಧನ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದ್ದು, ಈಗ ಗರಿಷ್ಠ ಮಟ್ಟವನ್ನು ತಲುಪಿರುವುದಾಗಿ ಆರೋಪಿಸಲಾಗಿದೆ.