ನವದೆಹಲಿ: ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಯಲು ವಿಶ್ವಬ್ಯಾಂಕ್ ನೆರವಿನ ₹ 7,500 ಕೋಟಿ ವೆಚ್ಚದ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಯಲ್ಲಿ ಮಂಗಳವಾರ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ, ಪೂರಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದರು.
ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ವಿಷಯದಲ್ಲಿ ಭಾರತದ ಸಾಧನೆ ಉತ್ತಮವಾಗಿಲ್ಲ. ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಅವರು ಸದನಕ್ಕೆ ವಿವರಿಸಿದರು.
‘ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಪೈಕಿ ಶೇ 65ರಷ್ಟು ಮಂದಿ 18 ರಿಂದ 45 ವರ್ಷ ವಯೋಮಾನ ಗುಂಪಿಗೆ ಸೇರಿದವರಾಗಿರುತ್ತಾರೆ ಎಂಬುದು ದುರದೃಷ್ಟಕರ. ಹೀಗಾಗಿ ಅಪಘಾತಗಳನ್ನು ತಡೆಯುವ ಹಾಗೂ ಅಮೂಲ್ಯ ಜೀವಗಳನ್ನು ಉಳಿಸುವ ಪ್ರಯತ್ನಕ್ಕೆ ಜನರೂ ಕೈಜೋಡಿಸುವುದು ಅಗತ್ಯ’ ಎಂದು ಅವರು ಹೇಳಿದರು.