‘ಇತರ ರಾಜ್ಯಗಳ ಕಾನೂನು ಅಧ್ಯಯನದ ನಂತರವೇ ಜನಸಂಖ್ಯಾ ನಿಯಂತ್ರಣ ಕುರಿತು ನಿರ್ಧಾರ’

ಅಹಮದಾಬಾದ್: ‘ಇತರ ರಾಜ್ಯಗಳು ಪರಿಚಯಿಸಿರುವ ಹೊಸ ಕಾನೂನುಗಳನ್ನು ಅಧ್ಯಯನ ಮಾಡಿದ ನಂತರವೇ ಜನಸಂಖ್ಯಾ ನಿಯಂತ್ರಣ ಕುರಿತು ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮಂಗಳವಾರ ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕರಡು ಮಸೂದೆಯನ್ನು ಪರಿಚಯಿಸಿರುವ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ನಿತಿನ್, ‘ಜನಸಂಖ್ಯಾ ನಿಯಂತ್ರಣ ಕುರಿತು ಬೇರೆ ಬೇರೆ ರಾಜ್ಯಗಳು ಹೊಸ ಕಾನೂನುಗಳನ್ನು ತರುತ್ತಿವೆ. ಅವುಗಳನ್ನು ಸರ್ಕಾರ ಮೊದಲು ಅಧ್ಯಯನ ನಡೆಸಲಿದೆ. ನಂತರ ಅಗತ್ಯವಿದ್ದರೆ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.
‘ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎರಡಕ್ಕೂ ಹೆಚ್ಚು ಮಕ್ಕಳಿರುವ ಅಭ್ಯರ್ಥಿಗಳನ್ನು ನಿಷೇಧಿಸುವ ಕಾನೂನನ್ನು ಹಲವು ವರ್ಷಗಳ ಹಿಂದೆಯೇ ಗುಜರಾತ್ ಸರ್ಕಾರ ಜಾರಿಗೆ ತಂದಿದೆ. ಕುಟುಂಬ ನಿಯಂತ್ರಣ ಯೋಜನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ’ ಎಂದೂ ನಿತಿನ್ ಪಟೇಲ್ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.