ಚೆನ್ನೈ: ‘ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಕಾರಣ ಚುನಾವಣಾ ಪ್ರಚಾರ ಕಾರ್ಯದಿಂದ ಕೆಲ ಕಾಲ ದೂರ ಇರುವೆ’ ಎಂದು ಚಿತ್ರನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ಹಾಸನ್ ಭಾನುವಾರ ಹೇಳಿದ್ದಾರೆ.
‘ಕೆಲವು ವರ್ಷಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕಾರಣ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯದ ಕಾರಣ ಈಗ ಮತ್ತೆ ಕಾಲಿಗೆ ಸಂಬಂಧಿಸಿದ ಚಿಕಿತ್ಸೆಗೆ ಒಳಗಾಗಬೇಕಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಕಾಲಿನಲ್ಲಿ ನೋವಿದ್ದರೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೆ. ಈ ಸಂದರ್ಭದಲ್ಲಿ ತಮಿಳುನಾಡು ಜನರು ತೋರಿದ ಪ್ರೀತಿ, ಅಭಿಮಾನದಿಂದ ನೋವು ಬಾಧಿಸಲಿಲ್ಲ. ಆದರೆ, ಶಸ್ತ್ರಚಿಕಿತ್ಸೆ ನಂತರ ವಿಶ್ರಾಂತಿ ಪಡೆಯುವ ಬೇಕು. ಮತ್ತೆ ಹೊಸ ಉತ್ಸಾಹದೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗುವೆ’ ಎಂದೂ ಅವರು ತಿಳಿಸಿದ್ದಾರೆ.