ನವದೆಹಲಿ (ಪಿಟಿಐ): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರ ವಿರುದ್ಧ ದಾಖಲಿಸಿರುವ ಪ್ರಕರಣದ ಎಫ್ಐಆರ್ ಪ್ರತಿ ಕೋರಿದ್ದ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ದಾಖಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ)ದೆಹಲಿ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿತ್ತಾಯ ಅವರು ಶುಕ್ರವಾರ ಈ ಕುರಿತು ಎನ್ಐಎಗೆ ನೋಟಿಸ್ ಜಾರಿ ಮಾಡಿದರು. ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೆನ್ನೈನ ಮೊಹಮ್ಮದ್ ಯೂಸೂಫ್ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ವಾದ ಮಂಡಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಅನಾರೋಗ್ಯವಿದೆ. ಹೀಗಾಗಿ, ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ನಿಗದಿಪಡಿಸಬೇಕು ಎಂದು ಎನ್ಐಎ ಪರ ಹಾಜರಿದ್ದ ವಕೀಲರು ಮನವಿ ಮಾಡಿದರು.
ವಕೀಲ ವೃತ್ತಿ ತರಬೇತಿ ಪಡೆಯುತ್ತಿರುವ ಅರ್ಜಿದಾರ ಯೂಸೂಫ್, ತನ್ನ ವಿರುದ್ಧ ದಾಖಲಿಸಿರುವ ಪ್ರಕರಣ ಸಂಬಂಧ ಎಫ್ಐಆರ್ ಪ್ರತಿ ನೀಡಬೇಕು. ಅಲ್ಲದೆ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲರಿಗೂ ಎಫ್ಐಆರ್ ಪ್ರತಿ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.