ನವದೆಹಲಿ: ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ವಿರುದ್ಧ ಆರೋಪಗಳನ್ನು ಒಳಗೊಂಡ ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಆ.9) ನಡೆಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಿರುವ ಕೊಠಡಿಯನ್ನು(ಮಾಲ್ಖಾನಾ) ಪರಿಶೀಲಿಸಲು ಆರೋಪಿಗಳಿಗೆ ಹಾಗೂ ಅವರ ಪರ ವಕೀಲರಿಗೆ ವಿಚಾರಣಾ ನ್ಯಾಯಾಲಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದೆ.
ನ್ಯಾಯಮೂರ್ತಿ ಮುಕ್ತಾ ಗುಪ್ತ ಈ ಅರ್ಜಿ ವಿಚಾರಣೆ ನಡೆಸುವರು.
ಚಿದಂಬರಂ ಹಾಗೂ ಪುತ್ರ ಕಾರ್ತಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಕಳೆದ ಮೇ 18ರಂದು ತಡೆ ನೀಡಿತ್ತು. ಅಲ್ಲದೇ, ಸಿಬಿಐ ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಇಬ್ಬರಿಗೂ ನೋಟಿಸ್ ನೀಡಿತ್ತು.