ನವದೆಹಲಿ: ಕೋವಿಡ್ ಪರಿಸ್ಥಿತಿಯಿಂದಾಗಿ ಸೆಂಟ್ರಲ್ ವಿಸ್ತಾ ನಿರ್ಮಾಣ ಯೋಜನೆಗೆ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ಧ ಪೀಠವು, ಹಿರಿಯ ವಕೀಲ ಸಿದ್ಧಾರ್ಥ ಲೂತಾರಾ ಅವರ ಮನವಿಯನ್ನು ಪುರಸ್ಕರಿಸಿ, ಮಂಗಳವಾರ ವಿಚಾರಣೆ ನಡೆಸಲು ಒಪ್ಪಿತು.
ಹೈಕೋರ್ಟ್ ಇದಕ್ಕೂ ಮೊದಲು, ₹ 20,000 ಕೋಟಿ ವೆಚ್ಚದ ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶವನ್ನು ಪರಿಶೀಲಿಸಬೇಕು ಎಂದು ತಿಳಿಸಿ ಮೇ 17 ಅನ್ನು ವಿಚಾರಣೆಗೆ ಗೊತ್ತುಪಡಿಸಿತ್ತು.
ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು, ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆ ದಾಖಲಿಸಲು ಅನುವಾಗುವಂತೆ ಬುಧವಾರಕ್ಕೆ ಪ್ರಕರಣ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ಅರ್ಜಿದಾರರಾದ ಅನ್ಯಾ ಮಲ್ಹೋತ್ರಾ ಮತ್ತು ಸೋಹೇಲ್ ಹಾಶ್ಮಿ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಂದಲೂ ಸೋಂಕು ಹರಡಬಹುದು. ಹೀಗಾಗಿ, ನಿರ್ಮಾಣಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.