ನವದೆಹಲಿ: ಹಿಜಾಬ್ ವಿಷಯಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಮೊದಲು ಪ್ರತಿಭಟಿಸಿದ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದ್ದ ವಿಷಯ ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಸ್ತಾಪಗೊಂಡು, ಚರ್ಚೆಗೆ ಕಾರಣವಾಯಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದೆ ಮೌಸಮ್ ನೂರ್, ‘ವೈಯಕ್ತಿಕ ಮಾಹಿತಿ ಹಕ್ಕುಗಳ ರಕ್ಷಣೆಗೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಹಿಜಾಬ್ ವಿವಾದ ಭುಗಿಲೆದ್ದ ವೇಳೆಯೇ, ಕನಿಷ್ಠ ಆರು ಜನ ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವೈಯಕ್ತಿಕ ವಿವರಗಳನ್ನು ಸೋರಿಕೆ ಮಾಡಲಾಗಿದ್ದು, ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ’ ಎಂದರು.
‘ವಿದ್ಯಾರ್ಥಿನಿಯರ ಹೆಸರು, ವಿಳಾಸ ಮತ್ತಿತರ ವೈಯಕ್ತಿಕ ವಿವರಗಳನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದು ಅವರ ಖಾಸಗಿತನದ ಉಲ್ಲಂಘನೆಯಾಗಿದೆ’ ಎಂದೂ ಹೇಳಿದರು.