ಶಿಮ್ಲಾ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಗೆ ಆಘಾತ ಉಂಟಾಗಿದೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ಸೇರಿ ಒಟ್ಟು 26 ಮಂದಿ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮುಖ್ಯಮಂತ್ರಿ ಜೈರಾಮ್ ಠಾಕೂರ್, ಹಿಮಾಚಲ ಪ್ರದೇಶ ಬಿಜೆಪಿ ಉಸ್ತುವಾರಿ ಸುಧಾನ್ ಸಿಂಗ್ ಅವರ ಸಮ್ಮುಖದಲ್ಲಿ ಒಟ್ಟು 26 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಮತದಾನಕ್ಕೆ 4 ದಿನ ಮಾತ್ರ ಇರುವಾಗ ಈ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದೆ.
ಪಕ್ಷಕ್ಕೆ ಆಗಮಿಸಿದವರಿಗೆ ಶುಭ ಕೋರಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ‘ಪಕ್ಷದ ಐತಿಹಾಸಿಕ ಗೆಲುವಿಗೆ ಒಟ್ಟಾಗಿ ಶ್ರಮಿಸೋಣ‘ ಎಂದು ಹೇಳಿದ್ದಾರೆ.
ಬಿಜೆಪಿ ಸೇರಿದವರ ಪಟ್ಟಿಯಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ಧರ್ಮಪಾಲ ಠಾಕೂರ್, ಕಾಂಗ್ರೆಸ್ ನಾಯಕರು ಹಾಗೂ ಸದಸ್ಯರು ಇದ್ದಾರೆ.
ಹಿಮಾಚಲದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ಕ್ಕೆ ಮತ ಎಣಿಕೆ ನಡೆಯಲಿದೆ.