ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ವಿರೋಧಿಸುವ ಪಕ್ಷಗಳಿಗೆ ಈಗಲೂ ಮನ್ನಣೆ: ಚಿದಂಬರಂ

ವಿವಿಧ ರಾಜ್ಯಗಳ ವಿಧಾನಸಭೆಗೆ ನಡೆದ ಉಪಚುನಾವಣೆ ಫಲಿತಾಂಶದ ವಿಶ್ಲೇಷಣೆ
Last Updated 3 ನವೆಂಬರ್ 2021, 10:21 IST
ಅಕ್ಷರ ಗಾತ್ರ

ನವದೆಹಲಿ: ‘ಬಿಜೆಪಿಗೆ ಇರುವಷ್ಟೇ ಗೌರವ–ಮನ್ನಣೆ ಅದನ್ನು ವಿರೋಧಿಸುವ ಪಕ್ಷಗಳಿಗೂ ಇದೆ ಎಂಬುದನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ತೋರಿಸಿದೆ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಬುಧವಾರ ಹೇಳಿದರು.

‘ಮುಂದಿನ ವರ್ಷ ವಿವಿಧ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳಲ್ಲಿ ಗಾಳಿ ಯಾವ ಕಡೆ ಬೀಸುತ್ತದೆ ಎಂಬುದು ಕುತೂಹಲ ಮೂಡಿಸುವಂತಿದೆ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆಗಳ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು, ‘ಉಪಚುನಾವಣೆ ಫಲಿತಾಂಶದ ವಿಶ್ಲೇಷಣೆ ನಮ್ಮನ್ನು ಆಲೋಚನೆಗೀಡು ಮಾಡುತ್ತದೆ. 30 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 7 ಸ್ಥಾನಗಳಲ್ಲಿ, ಅದರ ಮೈತ್ರಿ ಪಕ್ಷಗಳು 8 ಸ್ಥಾನಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆದ್ದಿದೆ’ ಎಂದರು.

‘ಬಿಜೆಪಿಯೇತರ ಪಕ್ಷಗಳು 7 ಸ್ಥಾನಗಳಲ್ಲಿ ಗೆದ್ದಿವೆ. ಇವುಗಳ ಪೈಕಿ ಬಿಜೆಪಿಯೊಂದಿಗೆ ರಹಸ್ಯ ಮೈತ್ರಿ ಹೊಂದಿರುವ ವೈಎಸ್‌ಆರ್‌ ಕಾಂಗ್ರೆಸ್‌ ಒಂದು ಸ್ಥಾನ ಗೆದ್ದಿದೆ’ ಎಂದರು.

ಉಪಚುನಾವಣೆಯ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿಗೆ ಬಳಸಿಕೊಂಡಿರುವ ಕಾಂಗ್ರೆಸ್‌ ಪಕ್ಷ, ಅಹಂಕಾರ ತೊರೆಯುವಂತೆ ಪ್ರಧಾನಿಗೆ ಕಿವಿಮಾತು ಹೇಳಿದೆ.

‘ರೈತರಿಗೆ ಮಾರಕವಾಗಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳದ ಮೂಲಕ ಮಾಡಲಾಗುತ್ತಿರುವ ಲೂಟಿಯನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT