ಪಟ್ನಾ: ಬಿಹಾರದ ಸಾರಣ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತದಲ್ಲಿ 30 ಮಂದಿ ಮೃತಪಟ್ಟಿರುವ ಬೆನ್ನಲ್ಲೇ, ಇತರ ಎರಡು ಜಿಲ್ಲೆಗಳಲ್ಲೂ ಕಳ್ಳಬಟ್ಟಿ ಸಾರಾಯಿ ಸೇವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸಿವಾನ್ ಜಿಲ್ಲೆಯಲ್ಲಿ ಆರು ಮಂದಿ ಹಾಗೂ ಬೇಗುಸರೈ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದೂ ವಿವರಿಸಿದ್ದಾರೆ.
ಸಾರಣ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತದಲ್ಲಿ 60 ಮಂದಿ ಮೃತಪಟ್ಟಿದ್ದಾರೆ ಎಂದು ದೃಢೀಕರಿಸದ ಮೂಲಗಳು ತಿಳಿಸಿವೆ. ಆದರೆ 30 ಜನರಷ್ಟೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
‘ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುವುದನ್ನು ಪತ್ತೆ ಹಚ್ಚಲು ಶೋಧ ಕಾರ್ಯ ಮುಂದುವರಿಸಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಬೇಗುಸರೈನಲ್ಲಿ ಇಬ್ಬರು ಯುವಕರು ವಿಷಕಾರಿ ರಾಸಾಯನಿಕ ಸೇವಿಸಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ’ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.