ನವದೆಹಲಿ: ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿರುವ ಸಕ್ಕರೆ ಕಾರ್ಖಾನೆಗಳಿಂದ ಭಾರಿ ವಾಯುಮಾಲಿನ್ಯ ಉಂಟಾಗುತ್ತಿದ್ದು, ಪರಿಸರವನ್ನು ಅನಿಯಂತ್ರಿತವಾಗಿ ಹಾಳುಗೆಡವಲಾಗುತ್ತಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಕಿಡಿಕಾರಿದೆ.
ಪರಿಹಾರ ಕ್ರಮಗಳನ್ನು ಕೈಗೊಳ್ಳಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಉತ್ತರ ಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಯುಪಿಪಿಸಿಬಿ) ಎನ್ಜಿಟಿ ನಿರ್ದೇಶನ ನೀಡಿದೆ.
ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್ವಿಎಸ್ ರಾಥೋಡ್ ನೇತೃತ್ವದಲ್ಲಿ ಎನ್ಜಿಟಿ ರಚಿಸಿರುವ ಮೇಲ್ವಿಚಾರಣಾ ಸಮಿತಿಗೆ, ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ನೇತೃತ್ವದ ನ್ಯಾಯಪೀಠ ಯುಪಿಪಿಸಿಬಿಗೆ ಸೂಚಿಸಿದೆ.
ಶಹಜಹಾನ್ಪುರದ ಪೊವಾಯನ್ನ ಬಾಂಡಾ ರಸ್ತೆಯಲ್ಲಿರುವ ಸಕ್ಕರೆ ಕಾರ್ಖಾನೆ ಪರಿಸರ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಉತ್ತರಪ್ರದೇಶದ ನಿವಾಸಿ ಸರೋಜ್ ಕುಮಾರ್ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮಂಡಳಿ ವಿಚಾರಣೆ ನಡೆಸಿತು.
ಕಾರ್ಖಾನೆಯಿಂದ ಉತ್ಪತ್ತಿಯಾಗುವ ಬೂದಿ ಮತ್ತು ಕಲುಷಿತ ಗಾಳಿಯಿಂದಾಗಿ ಈ ಪ್ರದೇಶದಲ್ಲಿ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.