ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ನಮ್ಮನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ ಅವರು ನಿಧನರಾದರು... ' ಎಂದು ಭಾರತೀಯ ವಾಯು ಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ವರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.
ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
IAF is deeply saddened to inform the passing away of braveheart Group Captain Varun Singh, who succumbed this morning to the injuries sustained in the helicopter accident on 08 Dec 21. IAF offers sincere condolences and stands firmly with the bereaved family.
— Indian Air Force (@IAF_MCC) December 15, 2021
ಇತ್ತೀಚೆಗೆ ವರುಣ್ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್ನಿಂದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿತ್ತು.
‘ವರುಣ್ ಸಿಂಗ್ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಇದನ್ನೂ ಓದಿ... ಸೇನಾ ಹೆಲಿಕಾಪ್ಟರ್ ಪತನ: ತನಿಖೆಗೆ ಏರ್ಮಾರ್ಷಲ್ ನೇತೃತ್ವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.