ಬೆಂಗಳೂರು: ಮುಖ್ಯಮಂತ್ರಿಗಳ ಭದ್ರತಾ ಸಿಬ್ಬಂದಿಯೇ ಡ್ರಗ್ಸ್ ಸರಬರಾಜು ಮಾಡಿದರೆ, ಡ್ರಗ್ಸ್ ಮಾಫಿಯಾವನ್ನು ಹಿಡಿದು ಶಿಕ್ಷೆಗೊಳಪಡಿಸುವವರು ಯಾರು? ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲಿ ಭದ್ರತಾ ಅಧಿಕಾರಿಗಳಾಗಿ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಮಂಗಳವಾರ ಡ್ರಗ್ ದಂಧೆ ನಡೆಸುತ್ತಿದ್ದ ಆರೋಪ ಮತ್ತು ಗಾಂಜಾ ಮಾರಾಟದ ಆರೋಪದ ಮೇಲೆ ಬಂಧಿಸಲಾಗಿದೆ ಎಂಬಮಾಧ್ಯಮಗಳ ವರದಿ ಉಲ್ಲೇಖಿಸಿ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಅಂಗಳ(ಮನೆ)ದಲ್ಲೇ ಡ್ರಗ್ಸ್ ವ್ಯಾಪಾರ ನಡೆಯುತ್ತಿದ್ದರೆ, ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರವು ಯುವಕರ ವರ್ತಮಾನ ಮತ್ತು ಭವಿಷ್ಯಕ್ಕೆ ಅಪಾಯ ತಂದೊಡ್ಡುತ್ತಿದೆಯೇ? ಸಿಎಂ ಬೊಮ್ಮಾಯಿ ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವರೇ? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ–ಡ್ರಗ್ಸ್ ಸಾಗಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಭದ್ರತಾ ಸಿಬ್ಬಂದಿ ಬಂಧನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.