ತಿರುವನಂತಪುರ/ನವದೆಹಲಿ: ಸಿಪಿಎಂ ನೇತೃತ್ವದ ಸರ್ಕಾರವು ರಾಜಭವನಕ್ಕೆ ಕಳುಹಿಸಿರುವ ಸುಗ್ರೀವಾಜ್ಞೆಯು ತಮ್ಮನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿದ್ದರೆ ಅದನ್ನು ರಾಷ್ಟ್ರಪತಿಗೆ ಶಿಫಾರಸು ಮಾಡುತ್ತೇನೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಾನು ಇದುವರೆಗೆ ಸುಗ್ರೀವಾಜ್ಞೆಯನ್ನು ನೋಡಿಲ್ಲ. ಅದನ್ನು ನೋಡಿದ ಬಳಿಕ ನಿರ್ಧಾರ ಪ್ರಕಟಿಸುತ್ತೇನೆ ಎಂದೂ ಹೇಳಿದ್ದಾರೆ.
ರಾಜ್ಯಪಾಲರು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು ಎಂಬುದನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದು ಕೇರಳ ಸಚಿವ ಎಂ.ಬಿ. ರಾಜೇಶ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರವು ಸಂವಿಧಾನಬದ್ಧವಾದ ಅಧಿಕಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಿದೆ ಮತ್ತು ಅದನ್ನು ರಾಜ್ಯಪಾಲರಿಗೆ ಕಳುಹಿಸಿದೆ ಎಂದೂ ತಿಳಿಸಿದ್ದಾರೆ.