ನವದೆಹಲಿ: 2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸುವಂತೆ ಪಾಕಿಸ್ತಾನ ಹೈಕಮಿಷನ್ನ ರಾಜತಾಂತ್ರಿಕ ಅಧಿಕಾರಿಯೊಬ್ಬರಿಗೆ ಭಾರತ ಶುಕ್ರವಾರ ಸಮನ್ಸ್ ನೀಡಿತು.
‘ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವ, 15 ದೇಶಗಳ 166 ಜನರ ಕುಟುಂಬಗಳು ಪ್ರಕರಣದ ಅಂತ್ಯಕ್ಕಾಗಿ ಕಾಯುತ್ತಿದ್ದಾರೆ. ಹಾಗಾಗಿ ತನಿಖೆಯನ್ನು ತ್ವರಿತಗೊಳಿಸಬೇಕು’ ಎಂದು ವಿದೇಶಾಂಗ ಸಚಿವಾಲಯ ಈ ಸಮನ್ಸ್ ಮೂಲಕ ತಿಳಿಸಿದೆ.
ಮುಂಬೈ ಮೇಲಿನ ಭಯೋತ್ಪಾದಕ ದಾಳಿಗೆ 13 ವರ್ಷ ತುಂಬಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಮನ್ಸ್ ಜಾರಿ ಮಾಡಿದೆ.
‘ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ತನ್ನ ನೆಲವನ್ನು ಬಳಸಿಕೊಳ್ಳಲು ಅನುಮತಿ ನೀಡುವುದಿಲ್ಲ ಎಂಬ ತನ್ನ ಬದ್ಧತೆಗೆ ತಕ್ಕಂತೆ ನಡೆದುಕೊಳ್ಳಬೇಕು’ ಎಂದೂ ಪಾಕಿಸ್ತಾನಕ್ಕೆ ಭಾರತ ಹೇಳಿದೆ.