ಪಾಕಿಸ್ತಾನ ಜತೆಗಿನ ಸಮಸ್ಯೆ ದ್ವಿಪಕ್ಷೀಯವಾಗಿ ಪರಿಹರಿಸಿಕೊಳ್ಳಲು ಬದ್ಧ: ಭಾರತ

ನವದೆಹಲಿ: ನೆರೆಯ ಪಾಕಿಸ್ತಾನದೊಂದಿಗೆ ಸಹಜ ಬಾಂಧವ್ಯವನ್ನು ಭಾರತ ಬಯಸುತ್ತದೆ. ಎಲ್ಲ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಎಲ್ಲ ಕದನ ವಿರಾಮ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಸೇನೆ ಒಪ್ಪಿರುವ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಈ ಹೇಳಿಕೆ ನೀಡಿದೆ.
‘ಪ್ರಮುಖ ವಿಷಯಗಳಲ್ಲಿ ನಮ್ಮ ನಿಲುವು ಬದಲಾಗಿಲ್ಲ. ಅದನ್ನು ಪುರುಚ್ಚರಿಸಬೇಕು ಎಂದು ನಾನು ಭಾವಿಸುವುದಿಲ್ಲ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ನಿಲುವೇನು ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.
ಓದಿ: ಕದನ ವಿರಾಮ ನಿಯಮದ ಎಲ್ಲ ಒಪ್ಪಂದಗಳ ಪಾಲನೆಗೆ ಭಾರತ, ಪಾಕಿಸ್ತಾನ ಒಪ್ಪಿಗೆ
ಗಡಿ ನಿಯಂತ್ರಣ ರೇಖೆಯೂ ಸೇರಿದಂತೆ ಇತರ ಎಲ್ಲ ಪ್ರದೇಶಗಳಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲ ಒಪ್ಪಂದಗಳನ್ನು ಪಾಲಿಸುವುದಾಗಿ ಭಾರತ ಹಾಗೂ ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಗುರುವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರು. ಇದಾದ ಬಳಿಕ ವಿದೇಶಾಂಗ ಸಚಿವಾಲಯ ದ್ವಿಪಕ್ಷೀಯ ಬಾಂಧವ್ಯ ಕುರಿತ ಹೇಳಿಕೆ ನೀಡಿದೆ.
ಭಾರತ ಮತ್ತು ಪಾಕಿಸ್ತಾನ 2003ರಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ, ಬಳಿಕ ಅನೇಕ ಬಾರಿ ಕದನವಿರಾಮ ಉಲ್ಲಂಘನೆಯಾಗಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.