ದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಇದೇ ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ಕಾಶ್ಮೀರದಲ್ಲಿ ಉಗ್ರರು ನಡೆಸುತ್ತಿರುವ ನಾಗರಿಕರ ಹತ್ಯೆ ಹಿನ್ನೆಲೆಯಲ್ಲಿ ಪಂದ್ಯ ರದ್ದಾಗಬೇಕು ಎಂದು ಎಎಪಿ ಶಾಸಕಿ ಆತಿಶಿ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಉಗ್ರವಾದವನ್ನು ಪ್ರೋತ್ಸಾಹಿಸುವುದನ್ನು ನಿಲ್ಲಿಸುವವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯವನ್ನು ನಡೆಸಬಾರದು,‘ ಎಂದು ಆಗ್ರಹಿಸಿದರು.
ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿಪ್ರಾಯ ತಿಳಿಯಲು ಬಯಸುವುದಾಗಿಯೂ ಅವರು ಹೇಳಿದರು.
‘ಕಾಶ್ಮೀರದಲ್ಲಿ ಭಾರತೀಯರ ಮೇಲೆ ಪದೇ ಪದೇ ದಾಳಿಗಳಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಈ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಜೊತೆ ಕ್ರಿಕೆಟ್ ಪಂದ್ಯ ನಡೆಯಬಾರದು. ಪ್ರಧಾನಿ ಇದನ್ನು ಒಪ್ಪುತ್ತಾರೆ’ ಎಂದು ಅತಿಶಿ ತಿಳಿಸಿದ್ದಾರೆ.