ಐಟಿ ನಿಯಮ: ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ನೂತನ ಮಾಹಿತಿ ತಂತ್ರಜ್ಞಾನದ ನಿಯಮಗಳಿಂದ ಡಿಜಿಟಲ್ ಮೀಡಿಯಾ ಪೋರ್ಟಲ್ಗಳಿಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
ವೈರ್, ಕ್ವಿಂಟ್ ಡಿಜಿಟಲ್ ಮಿಡಿಯಾ ಲಿಮಿಟೆಡ್ ಮತ್ತು ಪ್ರವ್ಡಾ ಮಿಡಿಯಾ ಫೌಂಡೇಷನ್ ಈ ಬಗ್ಗೆ ಅರ್ಜಿಗಳನ್ನು ಸಲ್ಲಿಸಿದ್ದವು.
ನೂತನ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಬಳಿಕ ಈ ಬಗ್ಗೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು.
ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.
ಪೋರ್ಟಲ್ಗಳ ಪರ ಹಾಜರಾದ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರು, ‘ಡಿಜಿಟಲ್ ಮಿಡಿಯಾ ಪೋರ್ಟಲ್ಗಳು ಸಲ್ಲಿಸಿರುವ ಅರ್ಜಿಗಳಿಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಬೇಕಾಗಿದೆ. ಹೀಗಾಗಿ, ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು, ‘1700 ಡಿಜಿಟಲ್ ಮಾಧ್ಯಮಗಳು ಐಟಿ ನಿಯಮಗಳ ಅನ್ವಯ ಮಾಹಿತಿಯನ್ನು ಸಲ್ಲಿಸಿವೆ’ ಎಂದು ವಿವರಿಸಿದರು.
‘ಇದು ಧ್ವನಿ ಮತದ ವಿಷಯವಲ್ಲ’ ಎಂದು ನಿತ್ಯಾ ರಾಮಕೃಷ್ಣನ್ ಅವರು ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರವು ಈ ವಿಷಯದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಾಲಯವು, ಯಾವುದೇ ಆದೇಶವನ್ನು ಹೊರಡಿಸಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.