ನವದೆಹಲಿ: ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಭ್ರಷ್ಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ಹೇಳಿಕೆ ಉಲ್ಲೇಖಿಸಿ, ಈ ಕುರಿತು ತನಿಖೆ ನಡೆಸಬೇಕು ಎಂದು ಕೋರಿ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಅವರು ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಜೈರಾಮ್ ಅವರು,’ 2023 ಫೆಬ್ರವರಿ 17ರಂದು ಅಮಿತ್ ಶಾ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮೇಘಾಲಯದಲ್ಲಿನ ಸರ್ಕಾರ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರ’ ಎಂದಿದ್ದಾರೆ. ಈ ಹೇಳಿಕೆಯ ಸತ್ಯಾಸತ್ಯತೆ ಅರಿಯಲು ಶಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು’ ಎಂದು ಕೋರಿದ್ದಾರೆ.
ಪತ್ರ ಬರೆದ ದಿನಾಂಕ ಮಾ.21 ಎಂದು ನಮೂದಿಸಿದ್ದು, ’ದೇಶದ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ತಮ್ಮ ಹುದ್ದೆಯ ಅಧಿಕಾರ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಕುರಿತು ಹೆಚ್ಚಿನ ಮಾಹಿತಿ ಗೊತ್ತಿರುತ್ತದೆ. ಹಾಗಾಗಿ ಶಾ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಈ ಬಗ್ಗೆ ಖಂಡಿತಾ ತಿಳಿಯಬಹುದು’ ಎಂದು ಅವರು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಸಂದರ್ಭ ’ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರ ಬಗ್ಗೆ ತಿಳಿದಿದೆ’ ಎಂಬ ಹೇಳಿಕೆ ಆಧರಿಸಿ ದೆಹಲಿ ಪೊಲೀಸರು ರಾಹುಲ್ ಅವರನ್ನು ವಿಚಾರಣೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಜೈರಾಮ್ ಅವರು ಶಾ ಹೇಳಿಕೆ ಉಲ್ಲೇಖಿಸಿ ಪತ್ರ ಬರೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.