ಜೋಡೊ ಯಾತ್ರೆ ಸಮಾರೋಪದಲ್ಲಿ ಪಾಲ್ಗೊಳ್ಳುವುದಿಲ್ಲ: ಜೆಡಿಯು ಅಧ್ಯಕ್ಷ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು ಎಂದಿರುವ ಸಂಯುಕ್ತ ಜನತಾ ದಳದ (ಜೆಡಿಯು) ಅಧ್ಯಕ್ಷ ಲಲನ್ ಸಿಂಗ್ ಅವರು, ‘ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ಮುಂದಾಗಬೇಕು’ ಎಂದು ಗುರುವಾರ ಹೇಳಿದ್ದಾರೆ.
‘ಚುನಾವಣೆ ನಡೆಯಲಿರುವ ನಾಗಾಲ್ಯಾಂಡ್ನಲ್ಲಿ ರಾಜಕೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಾಗಿರುವುದರಿಂದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರದಲ್ಲಿ ಲಲನ್ ಸಿಂಗ್ ತಿಳಿಸಿದ್ದಾರೆ.
‘ಏಕೀಕೃತ ವಿರೋಧ ಪಕ್ಷಗಳ ಅಗತ್ಯ ಇದೆ ಎಂಬುದನ್ನು ನಮ್ಮ ಪಕ್ಷವು ಮನಗಂಡಿದೆ. ಇದಕ್ಕಾಗಿ ಕಾಂಗ್ರೆಸ್ ಕಾರ್ಯಪ್ರವೃತ್ತವಾಗಲಿದೆ ಎಂಬುದನ್ನು ನಿರೀಕ್ಷಿಸುತ್ತಿದ್ದೇವೆ’ ಎಂದೂ ಆಶಯ ವ್ಯಕ್ತಪಡಿಸಿದ್ದಾರೆ.
‘ಯಾತ್ರೆಯ ಸಮಾರೋಪವು ಐತಿಹಾಸಿಕ ಕಾರ್ಯಕ್ರವಾಗಲಿದೆ ಮತ್ತು ಅದರ ಯಶಸ್ಸಿಗೆ ಶುಭ ಹಾರೈಸುತ್ತೇನೆ’ ಎಂದಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಹಲವು ಪಕ್ಷಗಳಿಗೆ ಆಹ್ವಾನ ನೀಡಿತ್ತು. ಕೆಲವು ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರು ತಮ್ಮ ಪ್ರತಿನಿಧಿಗಳನ್ನು ಕಳುಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ 30ರಂದು ಯಾತ್ರೆಯ ಸಮಾರೋಪ ಸಮಾರಂಭವು ಶ್ರೀನಗರದಲ್ಲಿ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.